Last Updated:
ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ. ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು ನೀಡಲಾಗಿದೆ.
ಬೆಂಗಳೂರು (ಮೇ.26): ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಶಾಲೆಗಳು (School) ತೆರೆಯಲಿವೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ (Students) ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಪ್ರಕಟ ಮಾಡಿದೆ. ವಿದ್ಯಾರ್ಥಿಗಳು & ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ ನೀಡಿದೆ.
ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟವಾಗಿದೆ. ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು ನೀಡಲಾಗಿದ್ದು, ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ರೆ, ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಶಾಲೆ ಕಟ್ಟಡದ ಸುರಕ್ಷತೆಗೆ ಕ್ರಮ ವಹಿಸಲಾಗಿದೆ.
6 ರಿಂದ 14 ವರ್ಷದ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಉರ್ದು-ಇಂಗ್ಲೀಷ್ ದ್ವಿಭಾಷಾ ಮಾಧ್ಯಮವೂ ಸಹ ಈ ವರ್ಷವೇ ಆರಂಭವಾಗ್ಬೇಕು. ದ್ವಿಭಾಷಾ ಶಿಕ್ಷಣಕ್ಕೆ ಇಲಾಖೆಯಿಂದ ಪೂರ್ವಾನುಮತಿ ಪಡೆದಿರುವ ಶಾಲೆಗಳಲ್ಲಿ ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ ನೀಡಲಾಗಿದೆ.
*ಮೇ 28- ಶಾಲೆಗಳ ಸಂಪೂರ್ಣ ಸ್ವಚ್ಛತೆ, ಕುಡಿಯುವ ನೀರು ಮತ್ತು ಸುರಕ್ಷತಾ ತಪಾಸಣೆಗಳನ್ನು ಪೂರ್ಣಗೊಳಿಸಲು ಕೊನೆಯ ದಿನಾಂಕ.
*ಮೇ 29 – ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.
*ಜೂನ್ 1 – ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳ ದಾಖಲಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭ.
*ಜೂನ್ 30 – ದಾಖಲಾತಿ ಆಂದೋಲನ ಮುಕ್ತಾಯಗೊಳ್ಳುವ ದಿನಾಂಕ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಹಲವೆಡೆ ನಾನಾ ಪ್ರಯತ್ನಗಳು ನಡೆಯುತ್ತಿದ್ದು, ಇಲ್ಲೊಬ್ಬ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಸರ್ಕಾರಿ ಶಾಲೆಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ₹1000 ಎಫ್ಡಿ ಇಡುತ್ತಿದ್ದಾರೆ. ಇಂಥದ್ದೊಂದು ಯೋಜನೆಯನ್ನು ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ)ಯೂ ಆಗಿರುವ ಎಸ್.ಎಂ. ಪಾಟೀಲ ಜಾರಿಗೆ ತಂದಿದ್ದಾರೆ.
(ವರದಿ: ಪ್ರಗತಿ ಶೆಟ್ಟಿ, ನ್ಯೂಸ್18 ಕನ್ನಡ, ಬೆಂಗಳೂರು)
May 26, 2026 10:18 AM IST

